ರಾಜ್ಯದ ಹಾಲಿ ಸಂಸದರಿಗೆ ಟಿಕೆಟ್ ಖಚಿತ-ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ

ಬೆಂಗಳೂರು, ಮಾ.13- ರಾಜ್ಯದ ಎಲ್ಲ ಹಾಲಿ ಸಂಸದರಿಗೆ ಈ ಬಾರಿಯೂ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ಟಿಕೆಟ್ ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದು ಉಳಿದ ಕ್ಷೇತ್ರಗಳಲ್ಲಿ ಪ್ರಭಾವಿ ನಾಯಕರಿಗೆ ಅವಕಾಶ ದೊರೆಯಲಿದೆ. ಇದೇ 16ರಂದು ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಮೈತ್ರಿ ಸರ್ಕಾರದ ವೈಫಲ್ಯಗಳು, ವರ್ಗಾವಣೆ ದಂಧೆ, ಭ್ರಷ್ಟಾಚಾರಗಳೇ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 20-22ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲಲು ಅನುಕೂಲವಾಗಲಿದೆ ಎಂದರು.

ಇದೇ 15ರಂದು ನಡೆಯಲಿರುವ ಕೋರ್ ಕಮಿಟಿ ಸಭೆಯಲ್ಲಿ ಪಕ್ಷದ ಎಲ್ಲ ಪ್ರಮುಖರು ಒಗ್ಗೂಡಿ 28ಕ್ಷೇತ್ರಗಳ ಒಮ್ಮತದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದ್ದೇವೆ 16ರಂದು ನಡೆಯಲಿರುವ ವರಿಷ್ಠರ ಸಭೆಯಲ್ಲಿ ಹಾಲಿ ಸಂಸದರು ಸೇರಿದಂತೆ ಇತರೆ ಕ್ಷೇತ್ರಗಳ ಅಭ್ಯರ್ಥಿಗಳನ್ನು ಪ್ರಕಟಿಸಲಾಗುವುದು ಬಹುತೇಕ ಹಾಲಿ ಸಂಸದರಿಗೆ ಟಿಕೆಟ್ ಖಚಿತ ಎಂದು ನುಡಿದರು.

ಸರ್ಕಾರ ಸ್ಥಾಪನೆಯಾಗಿ 9ತಿಂಗಳು ಕಳೆದಿದೆ ಈ ಸರ್ಕಾರ ಅಧಿಕಾರದಲ್ಲಿ ಮುಂದುವರೆಬೇಕೆಂದು ಜನರಿಗೆ ಸುತಾರಂ ಇಷ್ಟವಿಲ್ಲ. ಸಾಲಮನ್ನಾ ಹೆಸರಿನಲ್ಲಿ ರೈತರಿಗೆ ವಂಚನೆ ಮಾಡಿರುವುದು, ವರ್ಗಾವಣೆ ದಂಧೆ, ಭ್ರಷ್ಟಾಚಾರವೇ ಸರ್ಕಾರದ ಮಹಾನ್ ಸಾಧನೆ ಎಂದು ವ್ಯಂಗ್ಯವಾಡಿದರು.

ಅಧಿಕಾರಕ್ಕೆ ಬಂದರೆ 24ಗಂಟೆಗಳಲ್ಲಿ ರೈತರ ಸಾಲಮನ್ನಾ ಮಾಡುವುದಾಗಿ ಸಿಎಂ ಹೇಳಿದ್ದರು. 9ತಿಂಗಳು ಅವಧಿಯಲ್ಲಿ 4.5ಕೋಟಿ ಸಾಲಮನ್ನಾ ಮಾಡಲಾಗಿದೆ.

ರಾಜ್ಯದಲ್ಲಿ ಭೀಕರ ಬರಗಾಲದಿಂದ 160ಕ್ಕೂ ಹೆಚ್ಚು ತಾಲೂಕಿನ ಜನ ಸಂಕಷ್ಟದಲ್ಲಿದ್ದಾರೆ. ಅವರ ಕಣ್ಣೀರಿನ ಕಥೆ ಕೇಳುವವರೇ ಇಲ್ಲ ಎಂದು ವಾಗ್ದಾಳಿ ನಡೆಸಿದರು.

ಸರ್ಕಾರಕ್ಕೆ ಜನ ಹಿಡಿ ಶಾಪ ಹಾಕುತ್ತಿದ್ದಾರೆ. ಅನೇಕ ಕಡೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಇಲ್ಲದೆ ಜತೆಗೆ ಜನರಿಗೆ ಕೆಲಸವೂ ಇಲ್ಲದೆ ಗುಳೇ ಹೋಗುತ್ತಿದ್ದಾರೆ. ಸಾವಿರಾರು ಕೋಟಿ ತೆರಿಗೆ ಸಂಗ್ರಹಿಸುವ ಸರ್ಕಾರಕ್ಕೆ ಕುಡಿಯುವ ನೀರಿಗಾಗಿ 1ಸಾವಿರ ಕೋಟಿ ಬಿಡುಗಡೆ ಮಾಡುವ ಯೋಗ್ಯತೆ ಇಲ್ಲವೇ ಎಂದು ಪ್ರಶ್ನಿಸಿದರು.

ಜನರ ಬವಣೆಗಳನ್ನು ಕೇಳುವವರಿಲ್ಲ ವಿಧಾನಸೌಧದಲ್ಲಿ ಕುಳಿತು ಕೆಲಸ ಮಾಡುವಷ್ಟು ವ್ಯವಧಾನ ಸಚಿವರಿಗಿಲ್ಲ, ಇನ್ನು ಅಧಿಕಾರಿಗಳಿಗೆ ಹೇಳುವವರು ಕೇಳುವವರು ಇಲ್ಲದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಚುನಾವಣೆಯಲ್ಲಿ ಕುಮಾರಸ್ವಾಮಿ ರಾಜ್ಯದ ಜನತೆಗೆ ಸುಳ್ಳು ಭರವಸೆ ನೀಡಿದ್ದರಿಂದ ಜೆಡಿಎಸ್ 37ಸ್ಥಾನವನ್ನು ಗೆಲ್ಲುವಂತಾಯಿತು. ರೈತರ ಸಾಲಮನ್ನಾ ಯೋಜನೆ ಪ್ರಕಟಿಸದೆ ಹೋಗಿದ್ದರೆ 20 ಸ್ಥಾನಗಳನ್ನೂ ಗೆಲ್ಲಲ್ಲು ಸಾಧ್ಯವಾಗುತ್ತಿರಲಿಲ್ಲ. ರಾಜ್ಯದ ಇತಿಹಾಸದಲ್ಲಿ 104ಸ್ಥಾನ ಗೆದ್ದವರು ಪ್ರತಿಪಕ್ಷದ ಸ್ಥಾನದಲ್ಲಿ ಕೂತಿದ್ದರೆ, 3ನೇ ಸ್ಥಾನ ಪಡೆದವರು ಮುಖ್ಯಮಂತ್ರಿಯಾಗಿದ್ದಾರೆ ಎಂದು ಟೀಕಿಸಿದರು.

ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಯಾವುದೇ ರೀತಿ ಪರಿಣಾಮ ಬೀರುವುದಿಲ್ಲ ಎರಡು ಪಕ್ಷಗಳ ನಡುವೆ ಹೊಂದಾಣಿಕೆಯಿಲ್ಲ. ಕುಮಾರಸ್ವಾಮಿ, ಸಿದ್ದರಾಮಯ್ಯ ಇಬ್ಬರು ಪರಸ್ಪರ ಕತ್ತಿ ಮಸೆಯುತ್ತಿದ್ದಾರೆ. ಇವರು ಕಿತ್ತಾಡಿದಷ್ಟು ನಮಗೆ ಅನುಕೂಲವಾಗಲಿದೆ ಎಂದ ಅವರು ಉಮೇಶ್ ಜಾಧವ್ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿರುವುದು ಕಾಂಗ್ರೆಸ್‍ನಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು ತೋರಿಸುತ್ತದೆ ಎಂದು ಹೇಳಿದೆ ಎಂದರು. ಇನೂ ್ನ 4-5ದಿನ ಕಾದು ನೋಡಿ ಇನ್ನೂ ಏನೇನು ಬದಲಾವಣೆಯಾಗುತ್ತದೆ ಎಂದು ಸೂಚ್ಯವಾಗಿ ಹೇಳಿದರು.

ಕುಟುಂಬ ರಾಜಕಾರಣ ಕುರಿತು ಮಾತನಾಡಿದ ಯಡಿಯೂರಪ್ಪ ಇದು ಇತಿಮಿತಿಯಲ್ಲಿ ಇರಬೇಕು. ಅತಿಯಾದರೆ ಜನರು ನಮ್ಮನ್ನು ಟೀಕೆ ಮಾಡುತ್ತಾರೆ. ದೇವೇಗೌಡರ ಕುಟುಂಬದಲ್ಲಿ ಇದು ಅತಿಯಾಗಿದ್ದರಿಂದ ಚರ್ಚೆಗೆ ಬಂದಿದೆ.

ಮಂಡ್ಯದಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಂಬಂಧ ಸುಮಲತಾ ಅಂಬರೀಷ್ ಅವರ ತೀರ್ಮಾನದ ಮೇಲೆ ಎಲ್ಲವೂ ಅವಲಂಬಿತವಾಗಿದೆ. ಅವರು ಕಣಕ್ಕಿಳಿದರೆ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ತೇಜಸ್ವಿನಿ ಅನಂತಕುಮಾರ್ ಅವರ ಹೆಸರು ಬಹುತೇಕ ಅಂತಿಮವಾಗಿದೆ ಎಂದು ತಿಳಿಸಿದರು.

ಕಳೆದ 5ವರ್ಷಗಳ ಅವಧಿಯಲ್ಲಿ ಪ್ರಧಾನಿ ಮೋದಿಯವರ ಸಾಧನೆ ನಮಗೆ ಅನುಕೂಲಕರವಾಗಿದೆ ಭ್ರಷ್ಟಾಚಾರ ಮುಕ್ತ ಆಡಳಿತ, ದೇಶದ ಸುಭದ್ರತೆ, ಭಾರತದ ಸ್ಥಾನಮಾನವನ್ನು ವಿಶ್ವಮಟ್ಟದಲ್ಲಿ ಎತ್ತಿ ಹಿಡಿಯುವುದು ಸೇರಿದಂತೆ ಮತ್ತಿತರ ಭರವಸೆಗಳ ಮೇಲೆ ಅಧಿಕಾರಕ್ಕೆ ಬಂದಿದ್ದೆವು ಜನತೆಗೆ ನೀಡಿದ ಆಶ್ವಾಸನೆಯಂತೆ ಆಡಳಿತ ನಡೆಸಿದ್ದೇವೆ ಮತ್ತೆ ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಸಂಶಯ ಬೇಡ ಎಂದರು.

ಮುಖಂಡ ಆರ್.ಅಶೋಕ ಮಾತನಾಡಿ ರಾಜ್ಯದಲ್ಲಿ ನಾವು ಹೆಚ್ಚಿನ ಸ್ಥಾನ ಗಳಿಸುವ ಗುರಿಯೊಂದಿಗೆ ನಮ್ಮದೆ ಆದ ಕಾರ್ಯತಂತ್ರವನ್ನು ರೂಪಿಸಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿ 4-5ಬಾರಿ ರ್ಯಾಲಿ ನಡೆಸಬೇಕೆಂಬ ಲೆಕ್ಕಾಚಾರವಿದೆ. ಎಲ್ಲೆಡೆ ಕಾರ್ಯಕರ್ತರು ಮೋದಿಯವರನ್ನು ಕರೆತರುವಂತೆ ಒತ್ತಾಯಿಸುತ್ತಿದ್ದಾರೆ ಎಂದು ತಿಳಿಸಿದರು.

ಈಗಾಗಲೇ ಚುನಾವಣೆ ಪ್ರಕ್ರಿಯೆ ಕುರಿತಂತೆ ಅನೇಕ ಸಮಿತಿಗಳನ್ನು ರಚನೆ ಮಾಡಿದ್ದೇವೆ. ರಾಷ್ಟ್ರೀಯ ನಾಯಕರ ಪ್ರವಾಸ, ಕಾರ್ಯಕ್ರಮ ನಿರ್ವಹಣೆ, ಮಾಧ್ಯಮ ಸೇರಿದಂತೆ ಒಟ್ಟು 36ಸಮಿತಿಗಳನ್ನು ರಚಿಸಲಾಗಿದೆ. ಪ್ರತಿಯೊಬ್ಬರು ತಮಗೆ ನೀಡಿರುವ ಕೆಲಸಗಳನ್ನು ನಿರ್ವಹಿಸಲಿದ್ದಾರೆ ಎಂದು ಹೇಳಿದರು.

ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಮಾತನಾಡಿ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ದೂರ ಇರಬೇಕೆಂಬ ಒಂದೇ ಕಾರಣಕ್ಕೆ ಮಹಾಘಟ್ ಬಂಧನ್ ಮೈತ್ರಿ ಮಾಡಿಕೊಳ್ಳಲಾಗಿದೆ. ಇದರಲ್ಲಿ ಯಾವುದೇ ತತ್ವ, ಸಿದ್ದಾಂತಗಳಿಲ್ಲ ಭಯೋತ್ಪಾದನೆ ಮತ್ತು ಭಯೋತ್ಪಾದಕರನ್ನು ಕಾಂಗ್ರೆಸ್ ಹೇಗೆ ನಿರ್ವಹಿಸಿತ್ತು. ಈಗ ಮೋದಿ ಯಾವ ರೀತಿ ನಿರ್ವಹಣೆ ಮಾಡಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತು.

ಯಾರು ಏನೇ ಮಾಡಿದರು ಮೋದಿ ಅಧಿಕಾರಕ್ಕೆ ಬರುವುದನ್ನೂ ತಡೆಯಲು ಸಾಧ್ಯವಿಲ್ಲ ಎಂದು ಸ್ಪಷ್ಟ ನುಡಿಗಳಲ್ಲಿ ಹೇಳಿದರು.

ಶಾಸಕರಾದ ಶಿವನಗೌಡ ನಾಯಕ, ವೀರಣ್ಣ ಚರಂತಿಮಠ, ಡಾ. ಅಶ್ವತ್‍ನಾರಾಯಣ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ