ರಾಜ್ಯ ಸರ್ಕಾರದ ಮನವಿಗೆ ಸ್ಪಂಧಿಸಿದ ಕೇಂದ್ರ ಸಚಿವರು

ನವದೆಹಲಿ, ಜೂ.26- ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಬರ ಮತ್ತು ಮುಂಗಾರು ಮಳೆ ವಿಳಂಬದಿಂದ ಉಂಟಾಗಿರುವ ಕ್ಷಾಮ ಪರಿಸ್ಥಿತಿಯನ್ನು ನಿಭಾಯಿಸಲು ಅಗತ್ಯ ಸಹಕಾರ ಮತ್ತು ನೆರವು ನೀಡುವುದಾಗಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ಭರವಸೆ ನೀಡಿದ್ದಾರೆ.

ಕಂದಾಯ ಸಚಿವ ಆರ್.ವಿ.ದೇಶಪಾಂಡೆ ನವದೆಹಲಿಯಲ್ಲಿಂದು ಸಚಿವ ಡಿ.ವಿ.ಸದಾನಂದಗೌಡರನ್ನು ಭೇಟಿ ಮಾಡಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಂಭವಿಸಿರುವ ಬರ ಪರಿಸ್ಥಿತಿ, ಬೆಳೆ ಹಾನಿ, ಜಲ ಸಂಕಷ್ಟ ಮೊದಲಾದ ಸಮಸ್ಯೆಗಳ ಬಗ್ಗೆ ಮನವಿ ಸಲ್ಲಿಸಿ ವಾಸ್ತವ ಪರಿಸ್ಥಿತಿ ಬಗ್ಗೆ ಮನವರಿಕೆ ಮಾಡಿಕೊಟ್ಟರು.

ರಾಜ್ಯ ಸರ್ಕಾರದ ಮನವಿಗೆ ಸ್ಪಂದಿಸಿದ ಸಚಿವರು ಈ ಸಂಬಂಧ ಕೇಂದ್ರ ಸರ್ಕಾರದ ಕೃಷಿ ಮತ್ತು ಸಂಬಂಧಪಟ್ಟ ಸಚಿವಾಲಯಗಳ ಗಮನಕ್ಕೆ ತಂದು ರಾಜ್ಯದ ಬರ ಪರಿಸ್ಥಿತಿ ನಿಭಾಯಿಸಲು ಅಗತ್ಯವಾದ ನೆರವು, ಸಹಕಾರ ಮತ್ತು ಬೆಂಬಲ ನೀಡುವುದಾಗಿ ಆಶ್ವಾಸನೆ ನೀಡಿದರು.

ಸಚಿವ ದೇಶಪಾಂಡೆ ಅವರು ಇದೇ ಸಂದರ್ಭದಲ್ಲಿ ರಾಜ್ಯಕ್ಕೆ ಮಂಜೂರಾಗಬೇಕಾದ ವಿವಿಧ ಯೋಜನೆ ಮತ್ತು ಅನುದಾನಗಳ ಬಗ್ಗೆ ಸಚಿವರ ಗಮನಕ್ಕೆ ತಂದರು.

ಇವುಗಳನ್ನು ಆದ್ಯತೆ ಮೇರೆಗೆ ಪರಿಶೀಲಿಸಿ ಪೂರಕ ಕ್ರಮ ಕೈಗೊಳ್ಳುವುದಾಗಿ ಸದಾನಂದಗೌಡರು ಭರವಸೆ ಕೊಟ್ಟರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ